ಬೆಂಗಳೂರು :ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಇತಿಹಾಸ ವಿಷಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಆಯ್ಕೆಗೊಂಡು ಸರ್ಕಾರದಿಂದ ನೇಮಕಾತಿ ಆದೇಶ ಪಡೆದ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ನೀಡುವ ಪ್ರಕ್ರಿಯೆಗೆ ಸರ್ಕಾರ ಅಧಿಕೃತ ಸೂಚನೆ ನೀಡಿದೆ.
ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಸರ್ಕಾರವು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ಹಾಗೂ ಅದರ ತಿದ್ದುಪಡಿ ನಿಯಮಗಳ ಅಡಿಯಲ್ಲಿ ಅಧಿಸೂಚನೆಗಳನ್ನು ಜಾರಿಗೊಳಿಸಿತ್ತು. ಈ ನಿಯಮಗಳ ಅನ್ವಯ ಆಯ್ಕೆ ಪ್ರಾಧಿಕಾರವಾಗಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.
ಸರ್ಕಾರವು ಈ ಅಂತಿಮ ಆಯ್ಕೆಪಟ್ಟಿಯನ್ನು ಉಲ್ಲೇಖಿತ ಅಧಿಸೂಚನೆಯ ಮೂಲಕ ಅಧಿಕೃತವಾಗಿ ಪ್ರಕಟಿಸಿದ್ದು, ನಿಯಮ 9 ರ ಉಪ ನಿಯಮ (2) ಮತ್ತು (3) ರನ್ವಯ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಗಳ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಪರಿಶೀಲನೆ ಮತ್ತು ವಿಚಾರಣೆಗಳನ್ನು ಪೂರ್ಣಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ಆದೇಶ ನೀಡಲಾಗಿದ್ದು, ಜೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಿ ಸ್ಥಳ ನಿಯುಕ್ತಿ ಆದೇಶ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಸೂಚನೆ ನೀಡಿದೆ.
ಇದರ ನಡುವೆ, ಆಯ್ಕೆಯಾದ ಅಭ್ಯರ್ಥಿ ಶ್ರೀಮತಿ ಹೇಮಾವತಿ ಎನ್.ಎ. ಅವರು ಸಲ್ಲಿಸಿದ ಕೋರಿಕೆಯನ್ವಯ, ಅವರಿಗೆ ಸೇರುವಿಕೆಯ ಕಾಲಕ್ಕೆ ಅನುಮತಿ ನೀಡಿ, ನಿಯಮಾನುಸಾರ ಕ್ರಮವಹಿಸಿ ಸ್ಥಳ ನಿಯುಕ್ತಿ ನೀಡುವಂತೆ ಸರ್ಕಾರ ನಿರ್ದೇಶಿಸಿದೆ. ಅದರಂತೆ, ಅವರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಲು ಆದೇಶಿಸಲಾಗಿದೆ.
ಈ ಆದೇಶದಿಂದ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇತಿಹಾಸ ವಿಷಯದ ಬೋಧನಾ ಕೊರತೆ ನೀಗುವ ನಿರೀಕ್ಷೆ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಲು ಸಹಕಾರಿಯಾಗಲಿದೆ ಎಂದು ಶಿಕ್ಷಣ ವಲಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.







