ದಾವಣಗೆರೆ: ಇಂದಿರಾ ಕ್ಯಾಂಟೀನ್ಗಳಲ್ಲಿ ಮಾಂಸಾಹಾರ ಕೊಡುವ ವ್ಯವಸ್ಥೆ ಮಾಡಬೇಕೆಂಬ ಬೇಡಿಕೆ ಹೆಚ್ಚಾಗಿದ್ದು ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಇಂದಿರಾ ಕ್ಯಾಂಟೀನ್ಗಳಲ್ಲಿ ಸದ್ಯ ಮೊಟ್ಟೆ ಕೊಡಬೇಕೆಂಬ ಬೇಡಿಕೆ ಹೆಚ್ಚಾಗಿದೆ.
ಕ್ಯಾಂಟೀನ್ನಲ್ಲಿ ಬಡವರೇ ಊಟ ಮಾಡುವುದರಿಂದ ಅವರಿಗೆ ಮೊಟ್ಟೆಯಿಂದ ಪೌಷ್ಟಿಕ ಆಹಾರ ಸಿಗುತ್ತದೆ. ಮಾಂಸಾಹಾರ ವಿಚಾರವಾಗಿ ಜನರಿಂದ ಸಾಕಷ್ಟು ಅರ್ಜಿಗಳು ಬಂದಿದ್ದು ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ 186 ಹೊಸ ಇಂದಿರಾ ಕ್ಯಾಂಟಿನ್ ಮಾಡಲಾಗಿದೆ.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಸರಿಯಾಗಿಯೇ ನಡೆಯುತ್ತಿತ್ತು. ಆದರೆ, ಆ ಮೇಲೆ ಬಂದ ಸರ್ಕಾರದ ಅವಧಿಯಲ್ಲಿ ಕೆಲವೆಡೆ ಬಂದ್ ಆಗಿತ್ತು. ಈಗ ಎಲ್ಲ ಇಂದಿರಾ ಕ್ಯಾಂಟೀನ್ಗಳನ್ನು ಮತ್ತೆ ಶುರು ಮಾಡಿದ್ದರಿಂದ ಬಡವರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳನ್ನು ಸುತ್ತಾಡಿ ಇಂದಿರಾ ಕ್ಯಾಂಟೀನ್ಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.
ರಾಜ್ಯ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎನ್ನುವ ಕೋಮು ಸೌಹಾರ್ದ ವೇದಿಕೆ ಆರೋಪ ಶುದ್ಧ ಸುಳ್ಳು. ಕೆಲ ಮಾಧ್ಯಮಗಳು ದಾರಿ ತಪ್ಪಿಸುತ್ತಿವೆ. ನೂರಕ್ಕೆ ನೂರರಷ್ಟು ರಾಜ್ಯ ಸರ್ಕಾರ ಸಂವಿಧಾನ ಪರವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಗೊಳಪಡಿಸುವ ಕೆಲಸ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬಾರದೆಂದು ಬಿಜೆಪಿಯವರು ವಿನಾಕಾರಣ ಆರೋಪ, ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿರುವ ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದರು.







