Home » ಬೀದರ ಜಿಲ್ಲೆ » ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು: ಮಹಿಳೆಯರು, ಮಕ್ಕಳಿಗೆ ಅಕ್ಕ ಪಡೆ ಭದ್ರತೆಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ – ಸಚಿವ ಈಶ್ವರ ಬಿ. ಖಂಡ್ರೆ

ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು: ಮಹಿಳೆಯರು, ಮಕ್ಕಳಿಗೆ ಅಕ್ಕ ಪಡೆ ಭದ್ರತೆಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ – ಸಚಿವ ಈಶ್ವರ ಬಿ. ಖಂಡ್ರೆ

ಬೀದರ್: ಅಕ್ಕ ಪಡೆ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗುವ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಅಕ್ಕ ಪಡೆಗೆ ನಿಯೋಜಿಸಲಾದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದಲ್ಲಿ ಸುರಕ್ಷತೆ ಮತ್ತು ಜಾಗೃತಿಯ ಕಿರು ಸೇತುವೆಯಾಗಿ ಅಕ್ಕ ಪಡೆ ಕಾರ್ಯನಿರ್ವಹಿಸುತ್ತಿದೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದ್ದು, ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ತರಬೇತಿ ಪಡೆದ ಎನ್‌ಎಸ್‌ಸಿ ಕೆಡೆಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಕ್ಕ ಪಡೆಯ ರಾಜ್ಯ ಸಲಹೆಗಾರರಾದ ಶೈನಿ ಪ್ರದೀಪ್ ಗುಂಟಿ ಮಾತನಾಡಿ, ಮಹಿಳೆಯರು ಸುರಕ್ಷಿತರಾಗಿದ್ದರೆ ಜಿಲ್ಲೆ ಸುರಕ್ಷಿತವಾಗಿರುತ್ತದೆ ಎಂಬ ಆಲೋಚನೆಯಿಂದ ಅಕ್ಕ ಪಡೆ ರಚಿಸಿ ಅದನ್ನು ವ್ಯವಸ್ಥಿತವಾಗಿ ಜಾರಿಗೆ ತರಲಾಗಿದೆ ಎಂದರು.
ಅಕ್ಕ ಪಡೆಯಿಂದ ಇದುವರೆಗೆ ಎರಡು ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿದೆ. ಅಪಘಾತಗಳ ಸಂದರ್ಭದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳಿಗೆ ತೊಂದರೆ ನೀಡುವವರಿಂದ ರಕ್ಷಿಸುವಂತಹ ಕಾರ್ಯಗಳನ್ನು ಅಕ್ಕ ಪಡೆ ಯಶಸ್ವಿಯಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿಯೂ ಈ ಸೇವೆ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾತನಾಡಿ, ಅಕ್ಕ ಪಡೆ ಮಹಿಳೆಯರಿಂದ ಮಹಿಳೆಯರ ರಕ್ಷಣೆಗೆ ರೂಪುಗೊಂಡ ವಿಶೇಷ ಪಡೆಯಾಗಿದೆ. ಮಹಿಳೆಯರು ಹಾಗೂ ಮಕ್ಕಳಿಗೆ ತ್ವರಿತ ಸಹಾಯ, ಧೈರ್ಯ ಮತ್ತು ವಿಶ್ವಾಸ ಮೂಡಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಅಕ್ಕ ಪಡೆಯನ್ನು ಈಗ ಡಿಜಿಟಲ್ ತಂತ್ರಜ್ಞಾನ ಮೂಲಕ ಇನ್ನಷ್ಟು ಬಲಪಡಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಆರಂಭಗೊಂಡ ಈ ಪಡೆ ಈಗ ರಾಜ್ಯ ಮಟ್ಟಕ್ಕೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಎನ್.ಡಿ. ಸನ್ನಿದಿ, ಸಿಪಿಐಗಳಾದ ವಿಜಯಕುಮಾರ್ ಬಾವಗೆ, ಪಾಲಾಕ್ಷಯ್ಯ ಹಿರೇಮಠ್, ಕೆ.ಎಂ. ಬಿರಾದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ, ಮಕ್ಕಳ ಅಭಿವೃದ್ಧಿ ಅಧಿಕಾರಿ ಶಾರದಾ ಕಲ್ಮರ್ಕ, ಕರ್ನಾಟಕ ಅಲ್ಪಸಂಖ್ಯಾತರ ಕಮಿಟಿಯ ಸದಸ್ಯ ನಂದೀಪ್ ಕೌರ್, ಗುರುನಾನಕ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್, ಪಶುವೈದ್ಯಕೀಯ ವಿಶ್ವವಿದ್ಯಾಲಯದ ಡೀನ್ ಡಾ. ತಾಂದಳೆ, ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್, ವಿಸ್ಡಮ್ ಕಾಲೇಜಿನ ಮುಖ್ಯಸ್ಥ ಸಲಾಹುದ್ದೀನ್, ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಧನಲಕ್ಷ್ಮೀ ಪಾಟೀಲ್, ಶಾಹೀನ್ ಪದವಿ ಕಾಲೇಜಿನ ಪ್ರಾಂಶುಪಾಲ ಅಫ್ರಾ ಬೇಗಂ ಹಾಗೂ ಮನ್ನಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ನಂದಿನಿ ಉಪಸ್ಥಿತರಿದ್ದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This