ಔರಾದ : ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭರ್ಜರಿ ಸ್ವಯಂಪ್ರೇರಿತ ರಕ್ತದಾನ ಶಿಬಿರ – 100ಕ್ಕೂ ಅಧಿಕ ಜನರಿಂದ ರಕ್ತದಾನ
ಔರಾದ ತಾಲೂಕಿನ ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾನವೀಯತೆಯ ಪ್ರತೀಕವಾಗಿ ಬ್ರಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಸಹಯೋಗದಲ್ಲಿ ನಡೆದ ಈ ಶಿಬಿರಕ್ಕೆ ಸಾರ್ವಜನಿಕರಿಂದ ಅಪಾರ ಸ್ಪಂದನೆ ವ್ಯಕ್ತವಾಯಿತು.
ಶಿಬಿರವನ್ನು ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ರತಿಕಾಂತ್ ಸ್ವಾಮಿ ಉದ್ಘಾಟಿಸಿ ಮಾತನಾಡಿ, ರಕ್ತದಾನವು ಜೀವ ಉಳಿಸುವ ಅತ್ಯಂತ ಮಹತ್ವದ ಸೇವೆಯಾಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ಕನಿಷ್ಠ ಒಂದು ಬಾರಿ ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು. ರಕ್ತದ ಕೊರತೆಯಿಂದ ಸಂಕಷ್ಟದಲ್ಲಿರುವ ರೋಗಿಗಳಿಗೆ ಇಂತಹ ಶಿಬಿರಗಳು ಅತ್ಯಂತ ಸಹಕಾರಿಯಾಗುತ್ತವೆ ಎಂದರು.
ರಕ್ತದಾನಕ್ಕೂ ಮೊದಲು ದಾನಿಗಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಿ ರಕ್ತ ಸಂಗ್ರಹಿಸಲಾಯಿತು. ಮಾನವೀಯ ಸೇವೆಯ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಯುವಕರು, ಸಮಾಜಸೇವಕರು, ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಒಟ್ಟು 100ಕ್ಕೂ ಅಧಿಕ ಜನರು ರಕ್ತದಾನ ಮಾಡುವ ಮೂಲಕ ಸಮಾಜಸೇವೆಗೆ ಕೈಜೋಡಿಸಿದರು.
ರಕ್ತದಾನ ಮಾಡಿದ ಎಲ್ಲ ದಾನಿಗಳಿಗೆ ಪ್ರಮಾಣಪತ್ರ ಹಾಗೂ ಉಪಹಾರ ವಿತರಿಸಲಾಯಿತು. ಶಿಬಿರದಲ್ಲಿ ಸಂಗ್ರಹಿಸಿದ ರಕ್ತವನ್ನು ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಗಳ ಚಿಕಿತ್ಸೆಗೆ ಬಳಸಲಾಗುವುದು ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದರು.
ಈ ಶಿಬಿರದಲ್ಲಿ ಹಿರಿಯ ವೈದ್ಯಾಧಿಕಾರಿ ಡಾ. ರತಿಕಾಂತ್ ಸ್ವಾಮಿ, ಪಿಡಿಓ ಸಂತೋಕ್ ಪಾಟೀಲ್, ಗ್ರಾಪಂ ಅಧ್ಯಕ್ಷೆ ರೇಣುಕಾ ಚಂದ್ರಕಾಂತ್, ಡಾ. ಸಂಗಮೇಶ್ ಬಿರಾದರ್, ಡಾ. ಮಹಮ್ಮದ್ ವಾಜಿದ್, ಡಾ. ಸಿದ್ಧಾರೆಡ್ಡಿ, ಡಾ. ವೀರೇಶ್ ಬಿರಾದರ್, ಡಾ. ರೇಣುಕಾ, ಡಾ. ಆಶಾ, ಟಿ.ಎಂ. ಮಚ್ಚೆ, ಮುಖಂಡರಾದ ಮಂಜು ಸ್ವಾಮಿ, ತುಕಾರಾಮ ಹಸನ್ಮುಖಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾದ ಈ ರಕ್ತದಾನ ಶಿಬಿರವು ಸಾರ್ವಜನಿಕರಲ್ಲಿ ಮಾನವೀಯತೆ ಮತ್ತು ಸಮಾಜಸೇವೆಯ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತು ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.







